ಬೆಂಗಳೂರು: ಶಿಸ್ತಿನಿಂದಿರು ಅಂತಾ ಹೇಳಿದ್ದಕ್ಕೆ ಮಗನೇ ತನ್ನ ತಂದೆ ಭೀಕರವಾಗಿ ಹತ್ಯೆಗೈದ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ತಡರಾತ್ರಿ 2:30ರ ಸುಮಾರಿಗೆ ವಿವೇಕನಗರ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಇಸ್ಲಾಂ ಅರಬ್ (47) ಕೊಲೆಗೀಡಾದ ತಂದೆ. ಹಲ್ಲೆಗೈದು, ಚಾಕುವಿನಿಂದ ಇರಿದು ಹತ್ಯೆಗೈದಿರುವ ಅವರ ಪುತ್ರ ಬೋಲು ಅರಬ್ನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿವೃತ್ತ ಸೈನಿಕರಾಗಿದ್ದ ಇಸ್ಲಾಂ ಅರಬ್, ಶಿಸ್ತಿನಿಂದ ಇರುವಂತೆ ಹೆಚ್ಚು ಕಟ್ಟುನಿಟ್ಟಾಗಿ ಇರುತ್ತಿದ್ದರು. ತಂದೆಯ ಕಠಿಣ ನಿಯಮಗಳನ್ನು ಸಹಿಸಲಾರದೆ ಹತ್ಯೆಗೈದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಬಾಯ್ಬಿಟ್ಟಿದ್ದಾನೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ಶೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ್ದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಲು ಯತ್ನಿಸಿದ ಪ್ರಕರಣ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಈ ಹಿಂದೆ ನಡೆದಿತ್ತು. ಹತ್ಯೆ ಮಾಡಿದ ಮಗನನ್ನು ಪೊಲೀಸರು ಬಂಧಿಸಿದ್ದರು.
ಪಿರಿಯಾಪಟ್ಟಣದ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯ ಪಾಂಡು ಎಂಬಾತನೇ ತನ್ನ ತಂದೆ ಅಣ್ಣಪ್ಪ ಅವರನ್ನು ಕೊಲೆ ಮಾಡಿರುವ ಆರೋಪಿ. ಪಿರಿಯಾಪಟ್ಟಣದ ಬೈಲುಕುಪ್ಪೆ ಬಳಿ ಈ ಘಟನೆ ನಡೆದಿತ್ತು. ಅಣ್ಣಪ್ಪನ ಹೆಸರಲ್ಲಿ ವಿಮೆ ಮಾಡಿಸಿದ್ದ ಮಗ ಪಾಂಡು, ಆ ಹಣದ ಆಸೆಗೆ ಕೃತ್ಯ ಎಸಗಿದ್ದಾನೆ. ‘ನಿಮಗೆ ಟಿಬೇಟಿಯನ್ ಮೊದಲನೇ ಕ್ಯಾಂಪಿನಲ್ಲಿ ಕೆಲಸ ಇದೆ, ನೀವು ಹೋಗಿ’ ಎಂದು ತಂದೆಗೆ ಹೇಳಿರುವ ಆರೋಪಿ, ಬಳಿಕ ಹಿಂಬದಿಯಿಂದ ಫಾಲೋ ಮಾಡಿಕೊಂಡು ಬಂದು ತಲೆ ಭಾಗಕ್ಕೆ ದೊಣ್ಣೆಯಿಂದ ಬಲವಾಗಿ ಹೊಡೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಅಣ್ಣಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಆರೋಪಿಯು ತಂದೆಯ ಶವವನ್ನು ಬಿ.ಎಂ.ರಸ್ತೆಯ ಮಂಚ ದೇವನಹಳ್ಳಿ ಸಮೀಪ ಬಿಸಾಡಿದ್ದಾನೆ. ಸ್ವಲ್ಪ ಸಮಯದ ನಂತರ ಪೊಲೀಸ್ ಠಾಣೆಗೆ ಬಂದು ತನ್ನ ತಂದೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಿ ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.