ಮುಂದಿನ ವಿಧಾನಸಭೆ ಚುನಾವಣೆ ಗೆಲುವಿಗೆ ಬಿಜೆಪಿ ತಂತ್ರ ಚಿತ್ರದುರ್ಗದಲ್ಲಿ ರೀಎಂಟ್ರಿಗೆ ಮುಹೂರ್ತ
ಚಿತ್ರದುರ್ಗ: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಚುನಾವಣಾ ತಂತ್ರ ರೂಪಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅನಿವಾರ್ಯವಾಗಿ ಮತ್ತೆ ರಾಜಕೀಯ ಹೋರಾಟಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ.
ರಾಜ್ಯ ಬಿಜೆಪಿಯಲ್ಲಿ ಜನರನ್ನು ಆಕರ್ಷಿಸುವ ಫೇಸ್ ವ್ಯಾಲ್ಯೂ ಇರುವ ನಾಯಕರ ಕೊರತೆ ಇರುವ ಕಾರಣ ಮತ್ತೆ ಯಡಿಯೂರಪ್ಪ ಅವರನ್ನು ಮುಂಚೂಣಿಗೆ ತರಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಪ್ರವೇಶಕ್ಕೆ 50 ವರ್ಷ ಪೂರೈಸಿದ ಕಾರ್ಯಕ್ರಮವನ್ನು ಪಕ್ಷದಿಂದಲೇ ಆಯೋಜಿಸಲು ಮುಂದಾಗಿದ್ದಾರೆ. ಚಿತ್ರದುರ್ಗದಲ್ಲಿ ಬೃಹತ್ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.
ಚಿತ್ರದುರ್ಗದಲ್ಲಿ ಏಪ್ರಿಲ್ ಮಧ್ಯಭಾಗದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಸೇರಿಸಿ ಮಹಾಸಮಾವೇಶ ನಡೆಸುವ ಯೋಜನೆಯನ್ನು ಬಿಜೆಪಿ ರೂಪಿಸಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ ಈ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಮಾವೇಶದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಂಘಟನೆಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಪಕ್ಷ ರಣತಂತ್ರ ರೂಪಿಸುತ್ತಿದ್ದು, ಈ ಕಾರ್ಯಕ್ರಮ ಚುನಾವಣಾ ಅಭಿಯಾನಕ್ಕೆ ಪ್ರಮುಖ ವೇದಿಕೆಯಾಗಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು 1972ರಲ್ಲಿ ಜನಸಂಘದ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ನಂತರ 1983ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಹಲವು ಬಾರಿ ಶಾಸಕ, 2006ರಲ್ಲಿ ಉಪ ಮುಖ್ಯಮಂತ್ರಿ ಹಾಗೂ 2007, 2008, 2018 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ರಾಜಕೀಯ ಜೀವನದ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ಮುಂದಾಗಿದೆ.


