
ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಮಂಗಳವಾರ ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಮಂಡನೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು. ಪ್ರಧಾನಿ ಮೋದಿ ಅವರನ್ನು ‘ಸಮಾನತೆಯಲ್ಲಿ ನಂಬಿಕೆಯಿಲ್ಲದ ಭಯೋತ್ಪಾದಕ’ ಎಂದು ಟೀಕಿಸಿದರು.
ನಂತರ ಪ್ರಧಾನಿ ವಿರುದ್ಧ ಬಳಸಿದ ಪದಗಳ ಬಗ್ಗೆ ಪ್ರಶ್ನಿಸಿದಾಗ, ಖರ್ಗೆ ತಮ್ಮನ್ನು ತಾವು ಸಮರ್ಥಿಸಿಕೊಂಡರು. ಪ್ರಧಾನಿ ತಮ್ಮ ರಾಜಕೀಯ ವಿರೋಧಿಗಳನ್ನು, ಇಡಿ, ಸಿಬಿಐ, ಐಟಿ ಬಳಸುವ ಮೂಲಕ ಭಯಭೀತಗೊಳಿಸುತ್ತಿದ್ದಾರೆ ಎಂದು ಹೇಳುವುದು ನನ್ನ ಉದ್ದೇಶ. ಪ್ರಧಾನಿ ಮೋದಿ ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಭಯೋತ್ಪಾದಕರೆಂದು ನಾನು ಎಂದಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿ ವಿರುದ್ಧ ಖರ್ಗೆ ವಿವಾದಿತ ಹೇಳಿಕೆ






