
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನ ಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುನ್ನ ನಡೆದ ಸಮೀಕ್ಷೆಯಲ್ಲಿ ಸಮರ್ಥ ಶಾಮನೂರು ಪರವಾದ ಒಲವು ವ್ಯಕ್ತವಾಗಿದೆ. ಎಲ್ಲ ರೀತಿಯ ಲೆಕ್ಕಾಚಾರ ಹಾಕಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಅವಕಾಶ ನೀಡಲಾಗಿದೆ. ಪಕ್ಷದ ವರಿಷ್ಠರು, ಮುಸ್ಲಿಂ ಸಮುದಾಯದ ಮುಖಂಡರೊAದಿಗೆ ಸಭೆ ನಡೆಸಿ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೇಳುವ ಹಕ್ಕು ಪಕ್ಷದ ಎಲ್ಲ ಕಾರ್ಯಕರ್ತರಿಗೂ ಇದೆ. ದಕ್ಷಿಣ ಕ್ಷೇತ್ರದ ಟಿಕೆಟ್ಗೆ ಮುಸ್ಲಿಂ ಸಮುದಾಯ ಬೇಡಿಕೆ ಇಟ್ಟಿದ್ದು ತಪ್ಪಲ್ಲ. ಅಬ್ದುಲ್ ಜಬ್ಬಾರ್ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ಪಡೆಯುತ್ತೇವೆ. ಚುನಾವಣಾ ಪ್ರಚಾರಕ್ಕೆ ಬಂದಾಗ ಮತ್ತೊಂದು ಸುತ್ತಿನ ಮಾತುಕತೆ ನಡೆಸುತ್ತೇವೆ ಎಂದು ಹೇಳಿದರು.
ದಾವಣಗೆರೆ ಜಿಲ್ಲೆಯನ್ನು ಶಾಮನೂರು ಶಿವಂಶಕರಪ್ಪ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರು ನಗರಕ್ಕಿಂತಲೂ ಯೋಜನಾಬದ್ಧವಾಗಿ ನಿರ್ಮಿಸಿದ್ದಾರೆ. ಕೈಗಾರಿಕಾ ನಗರವನ್ನು ಶಿಕ್ಷಣ ಕಾಶಿಯಾಗಿ ರೂಪಿಸಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ಕೂಡ ವ್ಯಾಸಂಗಕ್ಕೆ ದಾವಣಗೆರೆಗೆ ಬರುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಿ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಕೊಂಡಾಡಿದರು.



