
ಬೆಂಗಳೂರು: ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಟೋಲ್, ಔಷಧ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕೇಂದ್ರದ ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೀವನ ಕಸಿಯಲಿದೆ. ಏಪ್ರಿಲ್ 1ರಿಂದ ಶೇ 5ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಹೆದ್ದಾರಿ ನಿರ್ಮಾಣಕ್ಕೂ ಮೊದಲೇ ಕೆಲವು ಕಡೆ ಟೋಲ್ ಸಂಗ್ರಹಿಸಲಾಗುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 900 ಕೋಟಿ ಟೋಲ್ ಸಂಗ್ರಹಿಸಲಾಗಿದೆ ಎಂದರು.
ಅಲ್ಲದೆ, ಏಪ್ರಿಲ್ 1ರಿಂದ 900 ಅಗತ್ಯ ಔಷಧಿಗಳ ಬೆಲೆ ಶೇ 12.12ರಷ್ಟು ಹೆಚ್ಚಾಗುತ್ತಿದೆ. ಇದು ರೋಗಿಗಳಿಗೆ ನೋವು ನೀಡುವ ಮತ್ತೊಂದು ಬೆಲೆ ಏರಿಕೆ. ಬಿಪಿ ಶುಗರ್ ಮಾತ್ರೆಗಳ ದರವೂ ಏರಿಕೆ ಆಗುತ್ತಿದೆ. ಡಯಾಬಿಟಿಸ್, ಬಿಪಿಗೆ ಬೇಕಾದ 31 ಹೊಸ ಔಷಧಗಳ ಬೆಲೆ ಏರಿಕೆ ಆಗುತ್ತಿದೆ. ದುಃಖದ ವಿಷಯವೆಂದರೆ ಹೃದಯಕ್ಕೆ ಅಳವಡಿಸುವ ಸ್ಟಂಟ್ ಬೆಲೆ ಕೂಡ ಹೆಚ್ಚಾಗುತ್ತಿದೆ ಎಂದು ಟೀಕಿಸಿದರು.
ಜನರ ಜೀವನ ಕಸಿದ ಕೇಂದ್ರ ಸರ್ಕಾರ: ಸುರ್ಜೆವಾಲಾ ವಾಗ್ದಾಳಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


