ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಪದವಿ ಪ್ರದಾನ
ತುಮಕೂರು: ಅಲೈಡ್ ಹೆಲ್ತ್ ಸೈನ್ಸ್ ವೈದ್ಯಕೀಯ ಕ್ಷೇತ್ರದ ಬೆನ್ನೆಲುಬಾಗಿದ್ದು, ಆರೋಗ್ಯ ಸೇವಾ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಈ ವಿಭಾಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪಠ್ಯಕ್ರಮ ನಿರ್ದೇಶಕ ಡಾ. ಷಣ್ಮುಖಪ್ಪ ಅಭಿಪ್ರಾಯಪಟ್ಟರು.
ನಗರದ ಶಿರಾಗೇಟ್ ಸಮೀಪದ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಹಾಗೂ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಪದವಿ ಪ್ರದಾನ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕ್ಷೇತ್ರದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಉದ್ಯೋಗ ಅವಕಾಶಗಳ ಬೇಡಿಕೆಯಿದ್ದು, ಜಾಗತಿಕ ಮಟ್ಟದಲ್ಲಿಯೂ ಈ ಕ್ಷೇತ್ರದ ಪರಿಣಿತರಿಗೆ ಅಪಾರ ಅವಕಾಶಗಳಿವೆ. ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಅಭಿವೃದ್ಧಿಯಾದರೂ ಮಾನವೀಯ ಸ್ಪರ್ಶ, ಕರುಣೆ ಹಾಗೂ ಅನುಕಂಪವನ್ನು ಯಾವುದೇ ಯಂತ್ರ ಅಥವಾ ವೈದ್ಯಕೀಯ ಉಪಕರಣಗಳು ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಯುವಜನರ ಭವಿಷ್ಯ ಉಜ್ವಲವಾಗಲು ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಶಿಕ್ಷಣ ಎಂದರೆ ಕೇವಲ ಪುಸ್ತಕ, ಅಂಕ ಮತ್ತು ಉದ್ಯೋಗವಲ್ಲ; ಅದು ವ್ಯಕ್ತಿತ್ವ ನಿರ್ಮಾಣ, ಸೃಜನಶೀಲತೆ ಮತ್ತು ಜ್ಞಾನ ವಿಕಾಸದ ಸಾಧನವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬೆಳವಣಿಗೆಯಿಂದ ಕ್ರಾಂತಿಕಾರಿ ಬದಲಾವಣೆಗಳಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲೈಡ್ ಹೆಲ್ತ್ ಸೈನ್ಸ್ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದರಿಂದ ಈ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಹೇಳಿದರು.
ಮಲೇಷ್ಯಾದ ಮಾಸಾ ವಿಶ್ವವಿದ್ಯಾಲಯದ ಎಲಿವೇಟ್ ಪ್ರಿಯೂನಿವರ್ಸಿಟಿ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ನಾಗರಾಜ ಸೂರ್ಯದೇವ ಮಾತನಾಡಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಟ್ರಸ್ಟಿ ಡಾ. ರಮಣ್ ಎಂ. ಹುಲಿನಾಯ್ಕರ್ ಸಂಸ್ಥೆಯ ಬೆಳವಣಿಗೆಯ ಪಯಣವನ್ನು ವಿವರಿಸಿದರು.
ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಹಾಗೂ ನೇತ್ರತಜ್ಞೆ ಡಾ.ಲಾವಣ್ಯ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಡಿಪ್ಲೊಮಾ ವಿಭಾಗದ 98 ಹಾಗೂ ಬಿಎಸ್ಸಿ ವಿಭಾಗದ 81 ಸೇರಿದಂತೆ ಒಟ್ಟು 179 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಮತ್ತು ಪ್ರಶಸ್ತಿಗಳನ್ನು ವಿತರಿಸಲಾಯಿತು.
ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್. ಪಾಟೀಲ್, ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಸಿ. ಕೃಷ್ಣ, ಉಪಪ್ರಾಂಶುಪಾಲ ಡಾ. ಸಿ.ಪಿ. ಚಂದ್ರಪ್ಪ, ಇಂಜಿನಿಯರಿAಗ್ ಕಾಲೇಜಿನ ಉಪಪ್ರಾಂಶುಪಾಲ ಡಾ. ಎನ್. ಚಂದ್ರಶೇಖರ್, ಶ್ರೀದೇವಿ ಆಸ್ಪತ್ರೆ ಸಿಇಒ ಡಾ. ಪ್ರದೀಪ್ ಕುಮಾರ್ ವೆಗ್ಗಿ, ಡಾ. ಸತೀಶ್ ಟಿ.ಜಿ., ಡಾ. ವಿ. ಪವಿತ್ರಾ ಉಪಸ್ಥಿತರಿದ್ದರು.









